ನಮ್ಮ ದಾವಣಗೆರೆ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಗುರುಕುಲ ವಸತಿಯುತ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಸಂಭ್ರಮ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಬೆಳೆಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಸಾಮೂಹಿಕ ಯೋಗಾಭ್ಯಾಸ ಪ್ರಮುಖ ಆಕರ್ಷಣೆಯಾಗಿತ್ತು.
ಶಾಲೆಯ ಆವರಣದಲ್ಲಿ ನಡೆದ ವಿಶೇಷ ಯೋಗ ಸಭೆಯಲ್ಲಿ, ಗುರುಕುಲ ವಸತಿಯುತ ಶಾಲೆಯ ಅಧ್ಯಕ್ಷರಾದ ಅಬ್ದುಲ್ ಆರ್ ಅವರು ವಿದ್ಯಾರ್ಥಿಗಳೊಂದಿಗೆ ಸ್ವತಃ ಯೋಗಾಸನಗಳನ್ನು ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಅವರೊಂದಿಗೆ ಶಾಲೆಯ ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಇಡೀ ಶಿಕ್ಷಕ ವೃಂದದವರು ಸಕ್ರಿಯವಾಗಿ ಪಾಲ್ಗೊಂಡು ವಿವಿಧ ಪ್ರಾಣಾಯಾಮ ಮತ್ತು ಯೋಗಾಸನಗಳನ್ನು ಯಶಸ್ವಿಯಾಗಿ ಪ್ರದರ್ಶಿಸಿದರು.
ನಿತ್ಯ ಯೋಗಾಭ್ಯಾಸದಿಂದ ವಿದ್ಯಾರ್ಥಿಗಳಲ್ಲಿ ನೆನಪಿನ ಶಕ್ತಿ ಮತ್ತು ದೈಹಿಕ-ಮಾನಸಿಕ ಏಕಾಗ್ರತೆ ವೃದ್ಧಿಯಾಗುತ್ತದೆ. ಯೋಗದಿಂದ ಒತ್ತಡ ಮುಕ್ತಿ, ದೈಹಿಕ ಸದೃಢತೆ ಹೆಚ್ಚಲಿದೆ ಎಂದು ಶಾಲೆಯ ಅಧ್ಯಕ್ಷರಾದ ಅಬ್ದುಲ್ ಆರ್ ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಶಾಲೆಯ 2500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಸ್ತುಬದ್ಧವಾಗಿ ಯೋಗ ಪ್ರದರ್ಶನ ನೀಡಿ ಗಮನ ಸೆಳೆದರು.
ಒಟ್ಟಾರೆಯಾಗಿ, ಗುರುಕುಲ ಶಾಲೆಯ ಈ ಯೋಗ ದಿನಾಚರಣೆಯು ಕೇವಲ ಒಂದು ದಿನದ ಆಚರಣೆಯಾಗದೆ, “ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಿ, ಆರೋಗ್ಯ ಭಾಗ್ಯವನ್ನು ಪಡೆಯಿರಿ” ಎಂಬ ಉದಾತ್ತ ಸಂದೇಶದೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು.ಈ ವೇಳೆ ದೂಡ್ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ, ನಿಲ್ಲಪ್ಪ,ಸಾನಿಯಾ ಜೆಹ್ರಾ,ಆರ್ಷಿಯಾ ಜೆಹ್ರಾ ಸೇರಿದಂತೆ ಶಿಕ್ಷಕ ವೃಂದದವರು ಇದ್ದರು.




